ಜ. 11 ರಂದ 8ನೇ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ
ತೀರ್ಥಹಳ್ಳಿ : ತಾಲೂಕು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಾರ್ವಜನಿಕ ಶಿಕ್ಷಣ ಇಲಾಖೆ , ತೀರ್ಥಹಳ್ಳಿ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಟ್ಟೇಹಕ್ಲು, ತಾಲೂಕು ಜಾನಪದ ಪರಿಷತ್ತು, ತೀರ್ಥಹಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜ. 11 ರಂದು ಶನಿವಾರ ಬೆಳಿಗ್ಗೆ 9:30 ಕ್ಕೆ ಕಟ್ಟೇಹಕ್ಲು ಸ. ಹಿ.ಪ್ರಾ. ಶಾಲೆ ಆವರಣದಲ್ಲಿ 8 ನೇ ತಾಲೂಕು ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲೂಕಿನ ಹೊದಲದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಎಚ್. ವಿ. ವಂಶಿಕ್ ಪ್ರಭು ಅವರು ಆಯ್ಕೆಯಾಗಿದ್ದಾರೆ. ವಂಶಿಕ್ ಪ್ರಭು ಹೊದಲದ ವಿಶ್ವನಾಥ ಪ್ರಭು ಹಾಗೂ ಅನುಶ್ರೀ ಅವರ ಪುತ್ರರಾಗಿದ್ದಾರೆ.
ವಂಶಿಕ್ ಎಳವೆಯಲ್ಲಿಯೇ ಸಾಹಿತ್ಯ ಮತ್ತು ಬರವಣಿಗೆಯ ಆಸಕ್ತಿ ಬೆಳೆಸಿಕೊಂಡಿರುವವನು. ವಂಶಿಕ್ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಗ್ರಾಮ ಪಂಚಾಯತಿಯ ಗ್ರಂಥಾಲಯ ವತಿಯಿಂದ ಜರಗಿದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.
ಈ ಸಮ್ಮೇಳನವನ್ನು ಕಟ್ಟೇಹಕ್ಲು ಸ.ಹಿ.ಪ್ರಾ. ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಕು. ಮಾನ್ಯ ಎನ್.ಎಂ. ಅವರು ಉದ್ಘಾಟಿಸುವಳು. ಮಾನ್ಯ ಶೇಡ್ಗಾರಿನ ಎನ್.ಆರ್. ಮಹೀಂದ್ರ ಮತ್ತು ಜ್ಯೋತಿ ಅವರ ಪುತ್ರಿ. ಮಾನ್ಯ ಕಳೆದ ಸಾಲಿನಲ್ಲಿ ತೀರ್ಥಹಳ್ಳಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 400 ಮೀ. ಓಟದಲ್ಲಿ ಪ್ರಥಮ, 600 ಮೀ. ಓಟದಲ್ಲಿ ದ್ವಿತೀಯ, ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನಗಳನ್ನು ಪಡೆಯುವ ಮೂಲಕ ಬಾಲಕಿಯರ ವಿಭಾಗದಲ್ಲಿ ತಾಲೂಕು ಮಟ್ಟದ ವೈಯಕ್ತಿಕ ಸಮಗ್ರ ಪ್ರಶಸ್ತಿಯನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಸಾಲ್ಗಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಮತಾ ಉಮೇಶ್, ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ. ಮಂಜುನಾಥ್, ತೀರ್ಥಹಳ್ಳಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್, ತೀರ್ಥಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ರೇಣುಕಾ ಎಂ. ಹೆಗಡೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಟಿ.ಕೆ.ರಮೇಶ್ ಶೆಟ್ಟಿ, ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಕಾಶ್ ನಾಯ್ಕ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಜಿ.ಶ್ರೀಧರ್, ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀದೇವಿ ಶೇಡ್ಗಾರ್, ತಾಲೂಕು ಜಾನಪದ ಪರಿಷತ್ತು ಅಧ್ಯಕ್ಷೆ ಲೀಲಾವತಿ ಜಯಶೀಲ ಮುಂತಾದವರು ಭಾಗವಹಿಸಲಿದ್ದಾರೆ.
ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ.
