ಕ್ರೇಸ್ಟ್ ಕಿಂಗ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರಾರಂಭೋತ್ಸವ Christ king

ಕ್ರೇಸ್ಟ್ ಕಿಂಗ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರಾರಂಭೋತ್ಸವ 

ಕಾರ್ಕಳ: ಇಲ್ಲಿನ ಕ್ರೇಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಆರಂಭೋತ್ಸವ ಸಂಸ್ಥೆಯ ನೂತನ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕ ಹಾಗೂ ವಾಗ್ಮೀ ಮುನಿರಾಜ ರೆಂಜಾಳ ಅವರು ಮುಖ್ಯ ಅತಿಥಿಗಳಾಗಿದ್ದರು. 

ಅವರು ದೀಪ ಬೆಳಗಿ ಪ್ರಥಮ ಪಿಯುಸಿ ಆರಂಭೋತ್ಸವನ್ನು ನಡೆಸಿಕೊಟ್ಟರು. ನಂತರ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಅವರು “ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು, ಒಳ್ಳೆಯ ಮನುಷ್ಯರಾಗಿ, ಒಳ್ಳೆಯ ಬದುಕನ್ನು ಬದುಕಬೇಕು. ಅದರೊಂದಿಗೆ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳ ಜೊತೆಗೆ ಪ್ರೀತಯಿಂದ ಮಾತನಾಡಬೇಕು, ಆ ಮೂಲಕ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಮೂಡಿಸಬೇಕು” ಎಂದು ಹೇಳಿದರು. 

ಇನ್ನೋರ್ವ ಅತಿಥಿ ಉದ್ಯಮಿ ವಿವೇಕಾನಂದ ಶೆಣೈ ಅವರು ಮಾತನಾಡಿ “ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪಡುವ ಪರಿಶ್ರಮದ ಬಗ್ಗೆ ಅರಿತುಕೊಳ್ಳಬೇಕು. ಮಕ್ಕಳ ಭವಿಷ್ಯ ರೂಪಿಸುವುದರಲ್ಲಿ ಕ್ರೇಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಈ ಕಾರ್ಕಳಕ್ಕೆ ಮಾದರಿ ಸಂಸ್ಥೆಯಾಗಿದೆ” ಎಂದು ಹೇಳಿದರು. 

ಶಿಕ್ಷಕ –ರಕ್ಷಕ ಸಂಘದ ಮಾಜೀ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಹಾಲಿ ಅಧ್ಯಕ್ಷ ಪ್ರಕಾಶ್ ಡಿಸೋಜ, ಸಂಸ್ಥೆಯ ವಿದ್ಯಾರ್ಥಿ ಆಪ್ತ ಸಮಾಲೋಚಕರಾದ ಡಾ.ಸಿಸ್ಟರ್ ಶಾರ್ಲೆಟ್ ಸಿಕ್ವೇರಾ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. 

ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮಿ ನಾರಾಯಣ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನೀಟ್ ಸಂಯೋಜಕ ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಮೌನೇಶ್ವರ ಆಚಾರ್ಯ ಪ್ರಸ್ತಾವನೆಗೈದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್, ಕೆಸಿಇಟಿ ಪರೀಕ್ಷೆಯ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 57ನೇ ರ‍್ಯಾಂಕ್ ಹಾಗೂ ರಾಷ್ಟ್ರ ಮಟ್ಟದ ಜೆಇಇ ಮೈನ್ ಪರೀಕ್ಷೆಯಲ್ಲಿ 99.69 ಪರ್ಸೆಂಟೈಲ್ ಪಡೆದ ಸಂಸ್ಥೆಯ ಸಾಧಕ ವಿದ್ಯಾರ್ಥಿ ಅನಂತ್ ಎನ್.ಕೆ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. 

ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ  ಜೋಸ್ನಾ ಸ್ನೇಹಲತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಸಂಸ್ಥೆಯ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಸ್ವಾಗತಿಸಿ ರಸಾಯನಶಾಸ್ತ್ರ ಉಪನ್ಯಾಸಕಿ  ಸೌಮ್ಯ ನಾಯ್ಕ್ ವಂದಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. 



Previous Post Next Post