ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಆರ್ಸಿಬಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಆರ್ಸಿಬಿ ಫ್ರಾಂಚೈಸಿ ಇಂದು ಪರಿಹಾರ ಘೋಷಣೆ ಮಾಡಿದೆ.
ಮಂಗಳವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿದ ಆರ್ಸಿಬಿ 17 ವರ್ಷಗಳ ಬಳಿಕ ಟ್ರೋಫಿ ಗೆದ್ದಿತ್ತು. ಮರುದಿನ, ಬುಧವಾರ ಬೆಂಗಳೂರಿನಲ್ಲಿ ಟ್ರೋಫಿಯೊಂದಿಗೆ ವಿಜಯೋತ್ಸವ ಮೆರವಣೆಗೆ ಮಾಡುವುದಾಗಿ ಘೋಷಿಸಲಾಗಿತ್ತು.
ಆದರೆ, ಮೆರವಣಿಗೆಯಿಂದಾಗಿ ಟ್ರಾಫಿಕ್ ಮತ್ತು ಭದ್ರತಾ ಸಮಸ್ಯೆ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅವಕಾಶ ನೀಡಿರಲಿಲ್ಲ. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮಾಚರಿಸಲು ನಿರ್ಧರಿಸಲಾಗಿತ್ತು.
ಇದರ ಬೆನ್ನಲ್ಲೇ ಲಕ್ಷಾಂತರ ಜನರು ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಮೈದಾನದ ಬಳಿ ಜಮಾಯಿಸಿದ್ದರು. ನಂತರ ಕಾಲ್ತುಳಿತ ನಡೆದು 11 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಆರ್ಸಿಬಿ ಫ್ರಾಂಚೈಸಿ ಮೃತರ ಕಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದೆ.
Tags:
ಬೆಂಗಳೂರು